- ಮಂಗಳೂರು ತುಳು ಅಕಾಡೆಮಿಯಲ್ಲೊಂದು ದಿನದ “ಬಲೇ ತುಳು ಓದುಗ” ಅಭಿಯಾನದಲ್ಲಿ ಉದ್ಘಾಟಕಿ ಮಾತು
ಮಂಗಳೂರು (ಜು 18):
:ತುಳುನಾಡು ಮಾತೃ ಮೂಲ ಸಂಸ್ಕೃತಿಯ ನಾಡು ಮತ್ತು ಮಾತೃ ಪ್ರಧಾನ ಮಹಿಳಾ ಗೌರವದ
ಸಾಮಾಜಿಕ ವ್ಯವಸ್ಥೆ ನಮ್ಮಲಿತ್ತು, ಇವತ್ತಿನ ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶದ ನಡುವೆಯೂ ಮಹಿಳೆಯರು ತಮ್ಮ ಸ್ಥಾನಮಾನ, ಗೌರವ, ಸಾಮಾರ್ಥ್ಯದ ಬಗ್ಗೆ ಪ್ರಜ್ಞಾಪೂರ್ವಕವಾಗಿ ಮುಂದೆ ನಿಲ್ಲಬೇಕು. ಮಹಿಳೆ ತನ್ನ ಸ್ವಾತಂತ್ರ್ಯ ಕಾಪಿಡಬೇಕು ಎಂದು ಹಿರಿಯ ಲೇಖಕಿ, ಚಿಂತಕಿ ಅತ್ರಾಡಿ ಅಮೃತ ಶೆಟ್ಟಿ ಅಭಿಪ್ರಾಯಪಟ್ಟರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ಸಂವಾದ ಯುವ ಸಂಪನ್ಮೂಲ ಕೇಂದ್ರ ಸಂಸ್ಥೆಯ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಕಾರ್ಯಕ್ರಮದ 14ನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಂವಾದ ಯುವ ಸಂಪನ್ಮೂಲ ಕೇಂದ್ರದ ಯೂತ್ ಆಕ್ಷ್ಯನ್ ಕನಿಯರ್ ಮಂಜುಳಾ ಸುನಿಲ್ ಅವರು ಮಾತನಾಡಿ, ತುಳು ಭಾಷೆ, ಸಾಹಿತ್ಯದ, ಸಂಸ್ಕೃತಿ ಬಗ್ಗೆ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಕಾರ್ಯಕ್ರಮ ಒಂದು ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಾತನಾಡಿ, ತುಳು ಭಾಷೆಯಲ್ಲಿ ಪ್ರಕಟಗೊಂಡ ಸಾಹಿತ್ಯದ ಪರಿಚಯ ವಿದ್ಯಾರ್ಥಿಗಳಿಗೆ ಆಗಬೇಕು ಅನ್ನುವ ಆಶಯದೊಂದಿಗೆ ‘ಬಲೆ ತುಳು ಓದುಗ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಚಾಲಕ ಮನೋಜ್ ಕುಮಾರ್ ವೇಣೂರು ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಪಾಂಗಾಳ ಬಾಬು ಕೊರಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂವಾದ ಯುವ ಸಂಪನ್ಮೂಲ ಕೇಂದ್ರದ ವಿವಿಧ ಕಾಲೇಜಿನ 40 ವಿದ್ಯಾರ್ಥಿಗಳು ಅಕಾಡೆಮಿಯ ಗ್ರಂಥಾಲಯದಲ್ಲಿ ತುಳು ಸಾಹಿತ್ಯ ಕೃತಿಗಳನ್ನು ಓದಿ ಸಮಾರೋಪ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.





